ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ಮೈಸೂರು: ಇಂಧನ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ, ಅಭಿವೃದ್ಧಿ ಹೊಂದಿದ ಅನೇಕ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇನ್ನೂ ಇಂಧನ ದರ ಕಡಿಮೆಯೇ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ‘ಜನರೊಂದಿಗೆ ಜನತಾ ದಳ’ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಐದು ಗ್ಯಾರಂಟಿ ಯೋಜನೆಗಳಿಂದ ಜನರು ಸುಖವಾಗಿ ಬದುಕುತ್ತಿದ್ದಾರೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಅವರು ಪ್ರತಿದಿನ ನನ್ನ ಮನೆಗೆ ಬಂದರೆ ಜನರ ನಿಜವಾದ ಕಷ್ಟ ಏನು ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.
ಇಂಧನ ದರ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಮೊದಲು ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು, ಇರಾನ್–ಇಸ್ರೇಲ್–ಅಮೆರಿಕಾ ನಡುವಿನ ಜಾಗತಿಕ ಉದ್ವಿಗ್ನತೆಯಿಂದ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ವಿಶ್ವದಾದ್ಯಂತ ಇಂಧನ ದರ ಏರಿಕೆಯಾಗಿದೆ. “ಅಭಿವೃದ್ಧಿ ಹೊಂದಿದ ಅನೇಕ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇನ್ನೂ ಇಂಧನ ದರ ಕಡಿಮೆಯೇ ಇದೆ ಎಂದು ಹೇಳಿದರು.
ಇದೇ ವೇಳೆ ಚಾಮುಂಡೇಶ್ವರಿ ಕ್ಷೇತ್ರ ಜೆಡಿಎಸ್ನ ಭದ್ರಕೋಟೆಯಾಗಿಯೇ ಉಳಿಯಲಿದೆ ಎಂದು ಹೇಳಿದ ಅವರು, “ಯಾವ ಒತ್ತಡಕ್ಕೂ ನಾವು ಮಣಿಯುವುದಿಲ್ಲ. ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಲು ಈ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು
ಹುಣಸೂರು ಶಾಸಕ ಜಿಡಿ.ಹರೀಶ್ ಗೌಡ ಮಾತನಾಡಿ, ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿರುವುದು ಜೆಡಿಎಸ್ಗೆ ಇನ್ನೂ ಬಲವಾದ ಬೆಂಬಲವಿದೆ ಎಂಬುದನ್ನು ತೋರಿಸುತ್ತದೆ ಎಂದರು.
ಕೇವಲ ಐದು ದಿನಗಳಲ್ಲಿ ಕಾರ್ಯಕ್ರಮ ಆಯೋಜಿಸಿದ್ದರೂ ಕ್ಷೇತ್ರದ ಜನರು ಸ್ವಯಂಪ್ರೇರಿತವಾಗಿ ಭಾಗವಹಿಸಿದ್ದಾರೆ ಎಂದು ಹೇಳಿದರು.



