ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್‌ ಇಂಟರನ್ಯಾಷನಲ್‌ ಲಿಮಿಟೆಡ್‌ (ಎಂಎಸ್‌ಐಎಲ್)‌ ಸಂಸ್ಥೆಯು ಸುಗಮ ಮತ್ತು ಪಾರದರ್ಶಕ ಚಿಟ್‌ ಫಂಡ್‌ ವ್ಯವಹಾರದ ಅನುಕೂಲಕ್ಕೆ ಅಭಿವೃದ್ಧಿಪಡಿಸಿರುವ ಸಾಫ್ಟ್​ವೇರ್‌ ಮತ್ತು ಮೊಬೈಲ್‌ ಆ್ಯಪ್​ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಶನಿವಾರ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು, ಎಂಎಸ್‌ಐಎಲ್‌ ಸರ್ಕಾರಿ ಸಂಸ್ಥೆಯಾಗಿರುವುದರಿಂದ ಮೋಸದ ಪ್ರಶ್ನೆ ಬರುವುದಿಲ್ಲ. ಸಂಸ್ಥೆಯ ವಹಿವಾಟು ಈಗ ವರ್ಷಕ್ಕೆ 500 ಕೋಟಿ ರೂ.ಗಿಂತಲೂ ಕಡಿಮೆ ಇದೆ. ಇದನ್ನು ಐದು ವರ್ಷಗಳಲ್ಲಿ 5 ಸಾವಿರ ಕೋಟಿ ರೂ.ಗಳಿಗೆ ಏರಿಸುವ ಗುರಿ ಇದೆ. ಸಾರ್ವಜನಿಕರು ಖಾಸಗಿ ಚಿಟ್​​ಗಳನ್ನು ನಂಬಿ ಮೋಸ ಹೋಗುವುದಕ್ಕಿಂತ ಇಲ್ಲಿ ಹಣ ಹಾಕುವುದು ಒಳ್ಳೆಯದು ಎಂದರು.

cm-siddaramaiah-launches-msil-chit-transaction-through-online

ಪಕ್ಕದ ಕೇರಳದಲ್ಲಿ ಅಲ್ಲಿನ ಸರ್ಕಾರಿ ಹಣಕಾಸು ಸಂಸ್ಥೆಯು ವರ್ಷಕ್ಕೆ ಚಿಟ್ ಸಹಿತ 1 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಆರ್ಥಿಕ ವ್ಯವಹಾರ ನಡೆಸುತ್ತಿದ್ದು, 45 ಲಕ್ಷ ಗ್ರಾಹಕರನ್ನು ಹೊಂದಿದೆ. ಅಲ್ಲಿನ ಚಿಟ್ ವ್ಯವಸ್ಥೆಯೊಂದರಲ್ಲೇ ವಾರ್ಷಿಕವಾಗಿ 47 ಸಾವಿರ ಕೋಟಿ ರೂ. ವಹಿವಾಟು ನಡೆಸುತ್ತಿದೆ. ಇದಕ್ಕಾಗಿ ಕೇರಳದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡಿದ್ದವರನ್ನೇ ಎಂಎಸ್‌ಐಎಲ್ ಸಮಾಲೋಚಕರನ್ನಾಗಿ ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಸೇನಾ ಕ್ಯಾಂಟೀನ್‌ ಮಾದರಿ ಎಂಎಸ್‌ಐಎಲ್‌ ಸ್ಟೋರ್‌: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ‌್ ಮಾತನಾಡಿ, ಸುಗಮ ಮತ್ತು ಪಾರದರ್ಶಕ ವ್ಯವಹಾರಕ್ಕೆಂದೇ ಎಂಎಸ್ಐಎಲ್ ಚಿಟ್ಸ್ ಸಾಫ್ಟ್​​ವೇರ್ ಮತ್ತು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಸಂಸ್ಥೆಯು ಈಗ 27 ಶಾಖೆಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಿಗೂ ಇದನ್ನು ವಿಸ್ತರಿಸಲಾಗುವುದು. ಮುಖ್ಯವಾಗಿ ಗ್ರಾಮೀಣ ಭಾಗ ಮತ್ತು ಮಹಿಳೆಯರ ಉಳಿತಾಯದ ಮೇಲೆ ನಮ್ಮ ಗಮನವಿದೆ. ನಮ್ಮಲ್ಲಿ ಬ್ಯಾಂಕ್​ಗಳಲ್ಲಿ ಕೊಡುವುದಕ್ಕಿಂತ ಹೆಚ್ಚಿನ ಲಾಭ ಇದರ ಮೂಲಕ ಸಿಗಲಿದೆ ಎಂದು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version