Updated By: Priyalachhi

ಮೈಸೂರು : ತಮ್ಮ ಆಪ್ತ ಸಹಾಯಕನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿರುವ ದಾಳಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಅಕ್ರಮ ಆಸ್ತಿ ಗಳಿಕೆ ಆರೋಪದಡಿ ತಮ್ಮ ಆಪ್ತ ಕಾರ್ಯದರ್ಶಿಯಾದ ಸರ್ದಾರ್ ಸರ್ಫರಾಜ್ ಖಾನ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್​, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸರ್ಫರಾಜ್‌ ಖಾನ್ ಅವರ ತಂದೆಯ ಕಾಲದಿಂದಲೂ ಶ್ರೀಮಂತರು. ಈ ದಾಳಿ ಯಾಕೆ ಆಗಿದೆ ಎಂಬುದು ಗೊತ್ತಿಲ್ಲ. ಏನಾಗಿದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

ಸಹಕಾರ ನಿರ್ದೇಶನಾಲಯ ಇಲಾಖೆಯಿಂದ ವಸತಿ ಇಲಾಖೆಗೆ ನಿಯೋಜನೆಯಲ್ಲಿರುವ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. ಸರ್ದಾರ್ ಸರ್ಫರಾಜ್ ಖಾನ್‌ಗೆ ಸಂಬಂಧಿಸಿದ ಬೆಂಗಳೂರಿನ ಹಲಸೂರು ಮತ್ತಿತರ ಕಡೆಗಳಲ್ಲಿರುವ ಮನೆಗಳು, ಕೊಡಗಿನಲ್ಲಿರುವ ಕಾಫಿ ಎಸ್ಟೇಟ್, ಹೆಚ್.ಡಿ. ಕೋಟೆಯಲ್ಲಿರುವ ರೆಸಾರ್ಟ್ ಸೇರಿದಂತೆ 5ಕ್ಕೂ ಅಧಿಕ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧಕಾರ್ಯ ಕೂಡ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಕೂಡ ಮಾಹಿತಿ ನೀಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್, ಡಿಸಿಎಂ ತಮ್ಮ ಇಲಾಖೆಯ ವಿಚಾರಕ್ಕೆ ದೆಹಲಿ ಹೋಗಿದ್ದಾರೆ. ಅವರು ಹೈಕಮಾಂಡ್ ಭೇಟಿ‌ ಮಾಡುತ್ತಿಲ್ಲ ಎಂದರು.

ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಅವರ ಆಪ್ತ ಹಾಗೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಚರಿಸಿದ್ದು, ಈ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲರೂ ಅವರವರ ಅಭಿಪ್ರಾಯ ಹೇಳುತ್ತಾರೆ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಈಗ ಸಿಎಂ ಕುರ್ಚಿ ಮೇಲೆ ಕೂತಿದ್ದಾರೆ. 2028ರ ವರೆಗೆ ಅವರೇ ಸಿಎಂ ಅಗಿರುತ್ತಾರೆ. ಇದು ನನ್ನ ಅಭಿಪ್ರಾಯ. ಆದರೆ, ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವು ಬದ್ಧ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಸನ್ನಿವೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version