Updated By: Priyalachhi

ಉಡುಪಿ: ಪರ್ಯಾಯ ಪುತ್ತಿಗೆ ಮಠ ಹಾಗೂ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಗೀತೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭವು ಡಿಸೆಂಬರ್​ 7ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದರು.

ಗೀತಾ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ವಿಶ್ವಗೀತಾ ಪರ್ಯಾಯ ಮಹೋತ್ಸವದ ಅಂಗವಾಗಿ ಡಿ.13ರಂದು ರಾಜಾಂಗಣದಲ್ಲಿ ವಿಶ್ವಶಾಂತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಅಮೆರಿಕದ ವರ್ಲ್ಡ್ ರಿಲೀಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ವಿಲಿಯಂ ಎಫ್. ವಿಂಡ್ಲೆ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥಾಪಕ ಸದ್ಗುರು ಶ್ರೀಮಧುಸೂದನ ಸಾಯಿ ಹಾಗೂ ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಚಿಂತಕರಾದ ರೋಹಿತ್ ಚಕ್ರತೀರ್ಥ ಹಾಗೂ ಡಾ.ಸುಧೀರ್ ರಾಜ್ ಕೆ. ಅವರು ವಿಚಾರ ಮಂಡಿಸುವರು. ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಲಿದ್ದು, ಕಿರಿಯ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು ಎಂದು ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದರು.

ಅಂದು ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸುತ್ತಾರೆ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಗೀತೋತ್ಸವ ಅಂಗವಾಗಿ ಡಿಸೆಂಬರ್ 6ರಂದು 18 ಕುಂಡಗಳಲ್ಲಿ ಗೀತಾ ಯಜ್ಞ ನಡೆಯಲಿದೆ. ರಾಜಾಂಗಣದಲ್ಲಿ ಬೆಳಗ್ಗೆ 6 ಗಂಟೆಯಿಂದ ಆರಂಭವಾಗುವ ಕಾರ್ಯಕ್ರಮದಲ್ಲಿ 18 ಮಂದಿ ಋತ್ವಿಜರು ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳ ಮೂಲಕ ಆಹುತಿ ನೀಡುವರು ಎಂದು ಪ್ರಸನ್ನ ಆಚಾರ್ಯ ವಿವರಿಸಿದರು.

ಡಿ.7ರಿಂದ 13ರ ವರೆಗೆ ಇಸ್ಕಾನ್​ನವರಿಂದ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಡಿ.27ರಂದು ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಇದೆ. ಕೋಟಿ ಗೀತಾ ಲೇಖನ ಯಜ್ಞಕ್ಕೆ ಸಂಬಂಧಿಸಿ ಭಕ್ತಾಧಿಗಳಿಂದ ಸಾಕಷ್ಟು ಬೇಡಿಕೆಗಳಿದ್ದು, ಈ ಯೋಜನೆ ಮುಂದಿನ ಎರಡು ವರ್ಷ ಕಾಲ ಮುಂದುವರೆಯಲಿದೆ. ಆನ್‌ಲೈನ್ ಗೀತಾ ರಸಪ್ರಶ್ನೆ ಸ್ಪರ್ಧೆ ನಡೆಯುತ್ತಿದ್ದು, 5 ಲಕ್ಷ ರೂ. ಬಹುಮಾನ ಇದೆ ಎಂದು ಶ್ರೀಗಳು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version