Updated By: Priyalachhi

ಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ‘ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ’ ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲತಃ ಮನುಷ್ಯರು. ಯಾವುದೇ ಧರ್ಮವಿದ್ದರೂ ಮನುಷ್ಯರು ಪರಸ್ಪರ ಪ್ರೀತಿಸಬೇಕು ಎಂದು ಹೇಳುತ್ತದೆಯೇ ವಿನಃ ದ್ವೇಷ ಮಾಡಿ ಎಂದು ಹೇಳಿಕೊಡುವುದಿಲ್ಲ. ಇದೇ ಸಮಾಜಕ್ಕೆ ನಾವು ಕೊಡುವ ಕೊಡುಗೆ ಎಂದರು.

ಶಿಕ್ಷಣದಿಂದ ವ್ಯಕ್ತಿತ್ವ ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ. ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬರಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠವು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದು ಶ್ಲಾಘಿಸಿದರು.

ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ ಎಂದು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version