ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು, ಮೇ 21: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ.

ಮುಖ್ಯಾಂಶಗಳು

  • ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ಕೋರಿ ಪಿಐಎಲ್​
  • 2 ತಿಂಗಳ ಬಾಕಿ ಗೃಹಲಕ್ಷ್ಮಿ ಹಣ ಪಾವತಿಗೆ ನಿರ್ದೇಶನ ಕೋರಿಕೆ
  • ಪಿಐಎಲ್ ಸಂಬಂಧ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಅರ್ಜಿದಾರರು ಯಾರು?

ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶನ ಕೋರುವಂತೆ ಬೆಂಗಳೂರಿನ ಕಮಲಾನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಎಂಬುವರು ಹೈಕೋರ್ಟ್‌ ಮೊರೆಹೋಗಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ಏನಿದೆ?

ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಈ ಬಾಕಿ ಇರುವ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ತಕ್ಷಣವೇ ಪಾವತಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಹಣಕಾಸು, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಗೆ ನೋಟಿಸ್

ಇನ್ನು ನ್ಯಾಯಮೂರ್ತಿಗಳಾದ ಡಾ. ಕೆ ಮನ್ಮಥ ರಾವ್‌ ಮತ್ತು ಸೂರಜ್ ಗೋವಿಂದರಾಜ್​​ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ಮಾಡಿದ್ದು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತುರ್ತು ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದು ವಿಚಾರಣೆಯನ್ನು ಮುಂದೂಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್‌ ಹುಯಿಲಗೋಳ ವಾದ ಮಂಡಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version