ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆದಾಗ್ಯೂ, ವದಂತಿ ಹರಡುತ್ತಿದ್ದಂತೆ ಜೈಲಿನ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು ಮತ್ತು ವರದಿಗಳು ಕೇವಲ ವದಂತಿ ಎಂದು ದೃಢಪಡಿಸಿದರು.

ಭಾನುವಾರ ರಾತ್ರಿಯಿಂದಲೇ ಈ ರೀತಿ ವದಂತಿಗಳು ಹರಡುತ್ತಿವೆ. ಇದರಿಂದಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಿರ ದೂರವಾಣಿ ಮೂಲಕ ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕೇಳುತ್ತಿದ್ದಾರೆ ಎಂದು ಹಿರಿಯ ಜೈಲು ಸಿಬ್ಬಂದಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

“ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳು ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿವೆ. ಅಂತಹ ವದಂತಿಗಳನ್ನು ನಂಬಿ ಯಾರೂ ಪರಪ್ಪನ ಅಗ್ರಹಾರ ಕೇಂದ್ರ ಜೈಲಿನ ಬಳಿ ಬರಬಾರದು ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ನಟ ದರ್ಶನ್ ಅವರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಬಹುದು. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆಯ ಅಗತ್ಯವಿದೆ ಎಂದು ಮೈಸೂರಿನ ಮನರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ಹೇಳಿದ್ದರು. ಇದೀಗ ಆಘಾತಕಾರಿ ವದಂತಿ ಹರಡಿದ್ದು, ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version