ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ರಾಮನಗರ ಬಳಿಯ ಬಿಡದಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆಗೆ ಸುಮಾರು ಶೇ. 80 ರಷ್ಟು ರೈತರು ಒಪ್ಪಿಗೆ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಪರಿಹಾರ ವಿತರಣೆ ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಘೋಷಿಸಿದ್ದಾರೆ.

ಯೋಜನೆಗೆ ವಿರೋಧ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಟೌನ್‌ಶಿಪ್ ಬಗ್ಗೆ ಪ್ರಸ್ತಾಪಿಸಿದ್ದರು ಎಂದು ತಿರುಗೇಟು ನೀಡಿದರು.

ಜೆಡಿಎಸ್ ನಾಯಕರೊಂದಿಗೆ ಅವರು ಆಯ್ಕೆ ಮಾಡಿದ ಯಾವುದೇ ಸ್ಥಳ ಮತ್ತು ಸಮಯದಲ್ಲಿ ಸಾರ್ವಜನಿಕ ಚರ್ಚೆಗೆ ಸಿದ್ಧನಿದ್ದೇನೆ ಎಂದು ಡಿಸಿಎಂ ಸವಾಲು ಹಾಕಿದರು.

ಬಿಡದಿ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ಇಂದು ರೈತರೊಂದಿಗೆ ಮಹತ್ವದ ಸಭೆ ನಡೆಸಿದ ಬಳಿ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ ಡಿಸಿಎಂ, “ನಮ್ಮ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ರೈತರು ಬಂದಿದ್ದರು. ಅವರಿಗೆ ಪರಿಹಾರದ ಕುರಿತು ನಾನು ಈಗಾಗಲೇ ಘೋಷಣೆ ಮಾಡಿದ್ದೇನೆ. ಹೆಚ್ಚು ಕಡಿಮೆ ಶೇ. 80 ರಷ್ಟು ರೈತರು ಬಂದು ತಮ್ಮ ಒಪ್ಪಿಗೆ ನೀಡಿದ್ದಾರೆ. ಪರಿಹಾರವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಅವರು ನಮ್ಮನ್ನು(ರಾಜ್ಯ ಸರ್ಕಾರ) ಒತ್ತಾಯಿಸಿದರು” ಎಂದು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಶಿವಕುಮಾರ್ ಹೇಳಿದರು.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಗ್ರಾಮವಾರು ಅಂತಿಮ ಅಧಿಸೂಚನೆಗಳನ್ನು ಹೊರಡಿಸಲಾಗುವುದು ಮತ್ತು ಪರಿಹಾರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

“ಮೂರು ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಮತ್ತು ಜೂನ್ ಮೊದಲ ವಾರದಿಂದ, ನಾವು ಅವರೆಲ್ಲರಿಗೂ ಪರಿಹಾರವನ್ನು ಬಿಡುಗಡೆ ಮಾಡಲು ಪ್ರಾರಂಭಿಸುತ್ತೇವೆ” ಎಂದು ಶಿವಕುಮಾರ್ ತಿಳಿಸಿದರು.

ಟೌನ್​ಶಿಪ್​ ಯೋಜನೆ ಬಗ್ಗೆ ಸರ್ಕಾರ ಪ್ರಕಟಿಸಿರುವ ಪರಿಹಾರ ಕ್ರಮಗಳು ಮತ್ತು ಭೂಮಿ ಸ್ವಾಧೀನ ಪ್ರಕ್ರಿಯೆ ಕುರಿತು ರೈತರಿಗೆ ವಿವರ ನೀಡಲಾಗಿದ್ದು, ಅವರು ಅದನ್ನು ಒಪ್ಪಿಕೊಂಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version