ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ವಾಹನ ಸವಾರರ ಪರದಾಟ

0
6

ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು, ಮೇ 18: ಕಳೆದ ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ತತ್ತರಿಸಿದ್ದ ರಾಜಧಾನಿ ಬೆಂಗಳೂರಿಗರಿಗೆ ವರುಣ ತಂಪೆರೆದಿದ್ದಾನೆ. ನಗರದ ವಿವಿಧೆಡೆ ಗಾಳಿ ಸಹಿತ ಮಳೆ ಸುರಿದಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದ ಸಮಸ್ಯೆಗೆ ಸಿಲುಕಿದ್ದು, ರಸ್ತೆ ಬದಿಗಳಲ್ಲೇ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಲ್ಲಿ, ಅಂಗಡಿ ಮುಂಗಟ್ಟುಗಳ ಎದುರು ಸವಾರರು ನಿಂತ ದೃಶ್ಯಗಳು ಕಂಡುಬಂದಿವೆ. ನಗರದ ಹಲವು ರಸ್ತೆಗಳು ಮಳೆ‌ನೀರಿನಿಂದ ಆವೃತವಾಗಿದ್ದು, ತಗ್ಗು ಪ್ರದೇಶದ ರಸ್ತೆಗಳು ಕೆರೆಯಂತಾಗಿವೆ.

ಮುಖ್ಯಾಂಶಗಳು

  • ಬಿಸಿಲ ಬೇಗೆಯಿಂದ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ವರುಣ
  • ನಗರದ ವಿವಿಧೆಡೆ ಗಾಳಿ ಸಹಿತ ಸುರಿದ ಸಾಧಾರಣ ಮಳೆ
  • ಮಳೆ ಕಾರಣ ಕೆಲವೆಡೆ ವಾಹನಗಳ ಸಂಚಾರಕ್ಕೆ ತೊಡಕು

ವಸಂತನಗರ, ಸಿಟಿ ಮಾರ್ಕೆಟ್​​, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆ.ಪಿ. ನಗರ, ಬನಶಂಕರಿ, ಕೋಣನಕುಂಟೆ, ಹೆಬ್ಬಾಳ, ಯಲಹಂಕ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ಇಂದಿರಾ ನಗರ, ಲಗ್ಗೆರೆ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್, ಸುಬ್ರಮಣ್ಯ ನಗರ, ನಾಗರಬಾವಿ, ಮೂಡಲಪಾಳ್ಯ, ಗಿರಿನಗರ, ಬಸವನಗುಡಿ, ಮಲ್ಲೇಶ್ವರಂ, ಮೆಜೆಸ್ಟಿಕ್, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ವರುಣನ ಆಗಮನವಾಗಿದೆ.

ಕೆ.ಆರ್. ಸರ್ಕಲ್ ಅಂಡರ್​​ಪಾಸ್​​ ಬಂದ್​​

ಇನ್ನು ಮಳೆ ಹಿನ್ನೆಲೆ ನೀರು ಸಂಗ್ರಹಣೆ ಸಾಧ್ಯತೆ ಇರುವ ಕಾರಣ ಮುಂಜಾಗ್ರತ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಬಂದ್ ಮಾಡಲಾಗಿದೆ. ಬ್ಯಾರಿಕೇಡ್ ಹಾಕುವ ಮೂಲಕ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದ್ದು, ಗಂಟೆಗೆ 40-50 ಕಿ.ಮೀ. ಗಾಳಿ, ಗುಡುಗು ಸಹಿತ ವರುಣ ಅಬ್ಬರಿಸಲಿದ್ದಾನೆ ಎಂದು ಇಲಾಖೆ ಎಚ್ಚರಿಸಿದೆ.

sambrama prabha editor suresh kt

LEAVE A REPLY

Please enter your comment!
Please enter your name here