Updated By: Priyalachhi
ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೇ ಮಾದರಿಯಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆಯವರು ಹೇಳಿದ್ದಾರೆ.
ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಿಂದ ರಾಜ್ಯದ 4 ಕೋಟಿಗೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಪ್ರತಿ ಪಕ್ಷಗಳು, ಬಂಡವಾಳಶಾಹಿಗಳು ಗ್ಯಾರಂಟಿಗಳನ್ನು ವಿರೋಧಿಸುವರು, ಟೀಕಿಸುವರು, ಅವರೇ ಇವಾಗ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಹಾಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆಂದು ಹೇಳಿದರು.
ಬೀದರ್ ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ 3,44,855 ಮಹಿಳೆಯರು ಫಲಾನುಭವಿಗಳು ಇದ್ದು, ಇದುವರೆಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಿಂಗಳಿಗೆ 2 ಸಾವಿರ ರೂ. ಅಂತೆ 1,552 ಕೋಟಿ ರೂ. ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,48,617 ಫಲಾನುಭವಿಗಳಿದ್ದು, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದ್ದು, 447 ಕೋಟಿ ರೂ. ಬಳಸಲಾಗಿದೆ.

