ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಬರೋಬ್ಬರಿ 4500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಶಿವಂ ಅಸೋಸಿಯೇಟ್ ಸಂಸ್ಥೆ ಮಾಲೀಕ ಶಿವಾನಂದ ನೀಲಣ್ಣನವರ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದು, ಆಸ್ತಿ ಜಪ್ತಿ ಪ್ರಕ್ರಿಯೆ ಆರಂಭಿಸಿದ್ದಾರೆ.
ಶಿವಂ ಅಸೋಸಿಯೇಟ್ಸ್ನ ಮಾಲೀಕ ಶಿವಾನಂದ್ ನೀಲಣ್ಣನವರ್ ಅವರನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶಿವಾನಂದ್ ನೀಲಣ್ಣನವರ್, ಆರ್ಬಿಐ ಅಥವಾ ಸೆಬಿಯಿಂದ ಯಾವುದೇ ಅನುಮೋದನೆಗಳಿಲ್ಲದೆ, ಹೆಚ್ಚಿನ ಬಡ್ಡಿದರದ ಭರವಸೆ ನೀಡಿ ಸಾವಿರಾರು ಕೋಟಿ ರೂ. ಹಣವನ್ನು ಹೂಡಿಕೆದಾರರಿಂದ ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬ್ರಾವ್ ಅವರು, ಶಿವಂ ಅಸೋಸಿಯೇಟ್ಸ್ ಬಗ್ಗೆ ವಿಚಾರಣೆ ನಡೆಸಲಾಗಿದೆ ಎಂದು ಹೇಳಿದರು.
ವಿಚಾರಣೆಯ ಆಧಾರದ ಮೇಲೆ, ಶುಕ್ರವಾರ ಸಂಜೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಸಂಬಂಧ ಕೆಪಿಐಡಿ (ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ) ಕಾಯ್ದೆ ಮತ್ತು ಬಡ್ಸ್ (ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.



