ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದಲ್ಲಿ ಆನೆ ಸೆರೆ ತಂಡ ಸ್ಥಾಪನೆ ಕಾರ್ಯ ಸಾಧ್ಯ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ, ವನ್ಯ ಜೀವಿಗಳಿಂದ ಬೆಳೆ ಹಾನಿ, ಶೀಘ್ರ ಪರಿಹಾರ ನೀಡಲು ಸೂಚಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ವನ್ಯ ಜೀವಿಗಳಿಂದ ಬೆಳೆ ಹಾನಿಯ ದೂರು ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಿಪಿಎಸ್​​ ಚಿತ್ರ ಸಹಿತ ಹಾನಿಯ ನಿರ್ಧರಣೆ ಮಾಡಿ, ತ್ವರಿತವಾಗಿ ಪರಿಹಾರ ಒದಗಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾನುವಾರ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆನೆ, ಕಾಡೆಮ್ಮೆ, ಕಾಡುಕೋಣ, ಹಂದಿಗಳಿಂದ ತೀವ್ರ ಬೆಳೆ ಹಾನಿ ಆಗುತ್ತಿದ್ದು, ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ಪರಿಹಾರ ನೀಡಬೇಕು. ಪ್ರಾಮಾಣಿಕವಾಗಿ ಬೆಳೆ ಹಾನಿಯ ನಿರ್ಧಾರ ಮಾಡಬೇಕು ಎಂದರು.

ಪ್ರಸ್ತುತ ವೃತ್ತಕ್ಕೆ 1 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಬಾಕಿ ಇರುವ ಎಲ್ಲ ಬೆಳೆ ಹಾನಿ ಪರಿಹಾರ ನೀಡುವಂತೆ ಸೂಚಿಸಿದ ಅವರು, ಆನೆ ನಿಗ್ರಹ ಕಂದಕ, ಸೌರ ತಂತಿ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡುವಂತೆಯೂ ತಿಳಿಸಿದರು.

ಆನೆ ಸೆರೆ ತಂಡ: ಮೂಡಿಗೆರೆ, ಕೊಪ್ಪ ಮೊದಲಾದ ಕಡೆಗಳಲ್ಲಿ ಆನೆ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲೇ ಒಂದು ಆನೆ ಸೆರೆ ಕಾರ್ಯತಂಡ ಸ್ಥಾಪಿಸುವ ಬಗ್ಗೆ ಪರಿಶೀಲಿಸಿ, ಕಾರ್ಯಸಾಧ್ಯ ವರದಿ ಕೇಳಿದ ಸಚಿವರು, ಹೊಸದಾಗಿ ಮಾಡಿರುವ ಆನೆ ಕಾರ್ಯಪಡೆ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂಬ ಬಗ್ಗೆಯೂ ವರದಿ ಸಲ್ಲಿಸಲು ತಿಳಿಸಿದರು.

ರೈಲ್ವೆ ಬ್ಯಾರಿಕೇಡ್ ಅಧ್ಯಯನ ಅಗತ್ಯ: ತಾವು ಸಚಿವರಾದ ತರುವಾಯ, ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಆನೆಗಳ ಉಪಟಳ ಇರುವ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುವರಿ ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಹಣ ಮಂಜೂರು ಮಾಡಿಸಿದ್ದು, ಕಾಮಗಾರಿಯೂ ಆಗಿದೆ. ಯಾವ ಯಾವ ವಲಯದಲ್ಲಿ ಎಷ್ಟು ಕಿಲೋ ಮೀಟರ್ ಬ್ಯಾರಿಕೇಡ್ ಹಾಕಲಾಗಿದೆ ಮತ್ತು ಬ್ಯಾರಿಕೇಡ್ ಅಳವಡಿಸಿದ ತರುವಾಯ ಆನೆ, ಕಾಡು ಕೋಣ ಹಾವಳಿ ಕಡಿಮೆ ಆಗಿದೆಯೇ ಎಂಬ ಬಗ್ಗೆ ಅಧಿಕಾರಿಗಳ ತಂಡ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು ಎಂದರು.

ವನ್ಯಜೀವಿಗಳ ಸಾವಿಗೆ ಕಾರಣವಾಗುವ ಉರುಳು ಅಳವಡಿಸಿರುವ ತೋಟಗಳ ಪರಿಶೀಲನೆ ನಡೆಸುವಂತೆ ತಿಳಿಸಿದ ಈಶ್ವರ ಖಂಡ್ರೆ, ಹೊರಗುತ್ತಿಗೆ ಸಿಬ್ಬಂದಿಗೆ ಅಗತ್ಯ ಉಪಕರಣ, ನಿಯಮಿತವಾಗಿ ವೇತನ, ಭತ್ಯೆ ಪಾವತಿಸಲು ಸೂಚಿಸಿದರು.

ಕಳಸದಲ್ಲಿ ಕಾಡು ಕೋಣದ ದಾಳಿಗೆ ಕೂಲಿ ಕಾರ್ಮಿಕ ಸಾವಿಗೀಡಾಗಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ ಸಚಿವರು, ಕಾಡುಕೋಣ ಸೆರೆ ತರಬೇತಿ ಪಡೆದಿರುವ ಸಿಬ್ಬಂದಿಗಳನ್ನು ಸಮಸ್ಯೆ ಇರುವ ಪ್ರದೇಶಕ್ಕೆ ನಿಯೋಜಿಸಿ ಜನರ ಅಮೂಲ್ಯ ಪ್ರಾಣ ಉಳಿಸುವಂತೆ ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version