Updated By: Priyalachhi

ನವದೆಹಲಿ/ಹುಬ್ಬಳ್ಳಿ: ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಈ ಮೂಲಕ ಕೇಂದ್ರವು ಸಂಕಷ್ಟ ಸಮಯದಲ್ಲಿ ರಾಜ್ಯದ ಕಡಲೆ ಬೆಳೆಗಾರರ ಬೆಂಬಲಕ್ಕೆ ಬಂದಿದೆ.

ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ(MSP) 5,875 ರೂ. ದರದಲ್ಲಿ ಒಟ್ಟು 1,01,340 ಮೆಟ್ರಿಕ್​ ಟನ್​ ಹಿಂಗಾರು ಹಂಗಾಮಿನ ಕಡಲೆ ಕಾಳು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಸಚಿವ ಪ್ರಲ್ಹಾದ್​ ಜೋಶಿ ಅವರಿಗೆ ಪತ್ರದ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ.

Image

ಗಮನ ಸೆಳೆದಿದ್ದ ಪ್ರಲ್ಹಾದ ಜೋಶಿ: ಕರ್ನಾಟಕದ ಪ್ರಮುಖ ದ್ವಿದಳ ಧಾನ್ಯಗಳಲ್ಲಿ ಕಡಲೆಯೂ ಒಂದಾಗಿದ್ದು, ಸುಮಾರು 9.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಉತ್ಪಾದನೆ ಆಗುತ್ತದೆ. ಆದರೆ, ಪ್ರಸ್ತುತ ಮಾರುಕಟ್ಟೆ ಬೆಲೆಗಿಂತ ತೀರಾ ಕಡಿಮೆ ಬೆಲೆಯಿಂದಾಗಿ ಕಡಲೆ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ, ಬೆಂಬಲ ಬೆಲೆಯಲ್ಲಿ ಖರೀದಿಗೆ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಸಚಿವ ಪ್ರಲ್ಹಾದ್​ ಜೋಶಿ ಪತ್ರ ಬರೆದು ಗಮನ ಸೆಳೆದಿದ್ದರು.

ಕಡಲೆಗೆ ಪ್ರಸ್ತುತ ಮಾರುಕಟ್ಟೆ ಬೆಲೆ RMS 2026-27ಕ್ಕೆ ಘೋಷಿಸಲಾದ ಪ್ರತಿ ಕ್ವಿಂಟಾಲ್‌ಗೆ 5,875 ರೂ.ಗಳು ಎಂಎಸ್​ಪಿಗಿಂತ ತುಂಬಾ ಕಡಿಮೆಯಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಕಡಲೆ ಬೆಲೆ ಮತ್ತಷ್ಟು ಕುಸಿಯುವ ಆತಂಕವಿದೆ. ಆದ್ದರಿಂದ, ಕರ್ನಾಟಕದಲ್ಲಿ ಕಡಲೆ(ಚನಾ)ಗೆ ಬೆಂಬಲ ಬೆಲೆ ಯೋಜನೆ (PSS) ಅನ್ನು ಆದ್ಯತೆ ಮೇರೆಗೆ ಜಾರಿಗೆ ತರುವ ಅವಶ್ಯಕತೆಯಿದೆ ಎಂದು ಪ್ರಲ್ಹಾದ್ ಜೋಶಿ ಪತ್ರದಲ್ಲಿ ವಿವರಿಸಿದ್ದರು.

ಜೋಶಿ ಅವರ ಮನವಿಗೆ ಸ್ಪಂದಿಸಿದ ಕೃಷಿ ಸಚಿವರು ರಾಜ್ಯದ ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್​ಗೂ ಹೆಚ್ಚು ಕಡಲೆ ಖರೀದಿಸಲು ರಾಜ್ಯ ಸರ್ಕಾರಕ್ಕೆ ಅನುಮೋದನೆ ನೀಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version