ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದ ಬಿಕ್ಕಟ್ಟಿನ ನಡುವೆಯೇ ದೇಶದ ಸ್ಥಿತಿಗತಿಗಳನ್ನು ಸಮತೋಲನದಲ್ಲಿಡಲು ಕೇಂದ್ರ ಸರ್ಕಾರ ಕಾರ್ಯಪ್ರವೃತ್ತಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಬಳಿಕ ಪ್ರಧಾನಿ ಮೋದಿಯವರು ಸಚಿವರೊಂದಿಗೆ ಬುಧವಾರ ಸಭೆ ನಡೆಸಿದ್ದು, ಜನಸಾಮಾನ್ಯರಿಗೆ ಯಾವುದೇ ರೀತಿಯ ಹೊರೆ ಅಥವಾ ತೊಂದರೆ ಆಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿವಿಧ ಸಚಿವಾಲಯಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸಭೆಯಲ್ಲಿ ಜಾಗತಿಕ ಮಟ್ಟದಲ್ಲಿ ಉಂಟಾಗುತ್ತಿರುವ ತೈಲ ಹಾಗೂ ಅನಿಲ ಸರಬರಾಜಿನ ಅನಿಶ್ಚಿತತೆ, ಸಾಗಣೆ ವ್ಯತ್ಯಯಗಳು ಹಾಗೂ ಬೆಲೆ ಏರಿಳಿತದ ಪರಿಣಾಮಗಳು ಭಾರತದಲ್ಲಿ ಹೇಗೆ ಪ್ರತಿಫಲಿಸಬಹುದು ಎಂಬುದರ ಕುರಿತು ಸಮಗ್ರ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ,
ಸಭೆಯಲ್ಲಿ ದೇಶದಲ್ಲಿ ಇಂಧನ ಭದ್ರತೆ ಕಾಪಾಡುವುದು ಅತ್ಯಂತ ಪ್ರಮುಖ ಎಂದು ಒತ್ತಿ ಹೇಳಿರುವ ಪ್ರಧಾನಮಂತ್ರಿಗಳು, ಎಲ್ಪಿಜಿ ಮತ್ತು ಎಲ್ಎನ್ಜಿ ಪೂರೈಕೆ ನಿರಂತರವಾಗಿರಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ,
ಸಂಪುಟ ಕಾರ್ಯದರ್ಶಿ ಸೋಮನಾಥನ್ ಸಭೆಯಲ್ಲಿ ಮಾತನಾಡಿ, ವಿವಿಧ ದೇಶಗಳಿಂದ ಪರ್ಯಾಯ ಆಮದು ವ್ಯವಸ್ಥೆಗಳನ್ನು ಬಲಪಡಿಸುವ ಮೂಲಕ ಎಲ್ಪಿಜಿ, ಎಲ್ಎನ್ಜಿ ಹಾಗೂ ವಿದ್ಯುತ್ ಲಭ್ಯತೆಯನ್ನು ಸ್ಥಿರವಾಗಿಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜೊತೆಗೆ ಪೈಪ್ನ್ಯಾಚುರಲ್ ಗ್ಯಾಸ್ (PNG) ಬಳಕೆಯನ್ನು ನಗರ ಪ್ರದೇಶಗಳಲ್ಲಿ ವಿಸ್ತರಿಸುವ ಯೋಜನೆಗಳಿಗೂ ಒತ್ತು ನೀಡಲಾಗಿದೆ ಎಂದು ಹೇಳಿದರು.
ಬಳಿಕ ಕೃಷಿ ಕ್ಷೇತ್ರಕ್ಕೂ ವಿಶೇಷ ಮಹತ್ವ ನೀಡಲಾಗಿದ್ದು, ಮುಂಗಾರು ಹಂಗಾಮಿನ ಮೊದಲು ರಸಗೊಬ್ಬರ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಸೂಚಿಸಿದರು.
