Updated By: Priyalachhi
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಧ್ವಜಾರೋಹಣ ಮಾಡಿದರು.
ತುಮಕೂರು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಧ್ವಜಾರೋಹಣ ಮಾಡಿದರು.
ಬೆಳಗಾವಿಯಲ್ಲಿ ಎಂಇಎಸ್ ಸೇರಿ ಯಾವುದೇ ಸಂಘಟನೆಗಳ ಜೊತೆಗೆ ಕಾಂಪ್ರಮೈಸ್ ಮಾಡಿಕೊಳ್ಳದೆ, ನಾಡಿನ ನೆಲ-ಜಲ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು.
ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಅಧಿಕಾರಿಯೊಬ್ಬರು ಎಂಇಎಸ್ ನಾಯಕನೊಂದಿಗೆ ನಿಂತು ಫೋಟೋ ತೆಗೆಸಿಕೊಂಡಿರುವ ಬಗ್ಗೆ ನಮ್ಮ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಯಾರು ನಮ್ಮ ಕನ್ನಡ ಭಾಷೆ ನೆಲದ ಬಗ್ಗೆ ಬದ್ಧತೆಗೆ ವಿರುದ್ಧವಾಗಿ ಹೋಗುತ್ತಾರೆಯೋ, ಅಧಿಕಾರಿ ಇರಬಹುದು ಅಥವಾ ಸಾಮಾನ್ಯ ವ್ಯಕ್ತಿಯೇ ಆಗಿರಬಹುದು. ಅವರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಬಹರೈನ್ ಹಾಗೂ ಉಕ್ರೇನ್ ಸೇರಿದಂತೆ ಅಮೆರಿಕದಲ್ಲಿ ನಾವಿಕ ಹಾಗೂ ಅಕ್ಕ ಸಂಸ್ಥೆಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದೆ. ಹೊರದೇಶದಲ್ಲಿ ಕನ್ನಡ ಸಂಸ್ಕೃತಿ ಹಾಗೂ ಭಾಷೆಯ ಬಗ್ಗೆ ವಿವಿಧ ಸಂಘಟನೆಗಳು ಪ್ರಚಾರ ಮಾಡುತ್ತಿವೆ. ಅಂತಹ ಸಂಘಟನೆಗಳಿಗೆ ಉತ್ತೇಜನಕಾರಿಯಾಗಿ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಈ ಮೂಲಕ ಹೊರದೇಶಗಳಲ್ಲಿಯೂ ಕೂಡ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಮಾಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಭಾರಿ ರಾಜಕೀಯ ಚಟುವಟಿಕೆಗಳ ಕುರಿತು ಕೇಳಿ ಬರುತ್ತಿರುವ ನವೆಂಬರ್ ಕ್ರಾಂತಿಯ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಇದೇ ವೇಳೆ ಗೃಹ ಸಚಿವರು ತಿಳಿಸಿದರು
