Updated By: Priyalachhi

ಬೆಂಗಳೂರು: ಪ್ರತಿ ವರ್ಷ ಐವರು ಪರಿಸರವಾದಿಗಳಿಗೆ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ತುಂಬಿರುವ ಅಂಗವಾಗಿ ಇಂದು ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ, ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದರು.

ಭೂಮಿಯ ಮೇಲಿನ ಜೀವಸಂಕುಲಕ್ಕೆ ಬದುಕಲು ಉತ್ತಮ ಪರಿಸರ ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು, ದಾವಣಗೆರೆ, ಕಲಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು, ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ಜನ ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ. ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ ಎಂದು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version