Updated By: Priyalachhi

ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಪ್ರವಾಸಿ ಶ್ರೀಲಂಕಾ ತಂಡದ 8 ಆಟಗಾರರು ತವರಿಗೆ ಮರಳಲು ಮುಂದಾಗಿದ್ದಾರೆ. ಪಾಕಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಕೆಲ ಆಟಗಾರರು ತಮ್ಮ  ಸುರಕ್ಷತಾ ಕಾಳಜಿಯನ್ನು ಉಲ್ಲೇಖಿಸಿ ತವರಿಗೆ ಮರಳಲು ವಿನಂತಿಸಿದ್ದಾರೆ. ಹೀಗಾಗಿ ಈ ಆಟಗಾರರನ್ನು ತವರಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಶ್ರೀಲಂಕಾ ತಂಡದ ಕೆಲ ಸದಸ್ಯರು ಸ್ವದೇಶಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದರೂ, ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಉಳಿದ ಆಟಗಾರರಿಗೆ ಮತ್ತು ಸಹಾಯಕ ಸಿಬ್ಬಂದಿಗೆ ಪಾಕಿಸ್ತಾನದಲ್ಲಿ ತಮ್ಮ ಪಂದ್ಯಗಳನ್ನು ಮುಂದುವರಿಸಲು ಸೂಚನೆ ನೀಡಿದೆ.

ಪ್ರವಾಸಿ ತಂಡದ ಪ್ರತಿಯೊಬ್ಬ ಸದಸ್ಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಅಲ್ಲದೆ ಎಲ್ಲಾ ಕಳವಳಗಳನ್ನು ಸರಿಯಾಗಿ ಪರಿಹರಿಸಲಾಗುತ್ತಿದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತನ್ನ ಆಟಗಾರರಿಗೆ ಆಶ್ವಾಸನೆ ನೀಡಿದೆ.

ಇನ್ನು ತವರಿಗೆ ಮರಳಲಿರುವ ಆಟಗಾರರಿಗೆ ಬದಲಿಯಾಗಿ ಶ್ರೀಲಂಕಾದಿಂದ ಕೆಲ ಆಟಗಾರರು ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಈ ಮೂಲಕ ಸರಣಿಯನ್ನು ಪೂರ್ಣಗೊಳಿಸಲು ಲಂಕಾ ಕ್ರಿಕೆಟ್ ಮಂಡಳಿ ಯೋಜನೆ ರೂಪಿಸಿದೆ. ಇದಾಗ್ಯೂ ಗುರುವಾರಕ್ಕೆ ನಿಗದಿಯಾಗಿರುವ 2ನೇ ಏಕದಿನ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಶ್ರೀಲಂಕಾ ಮತ್ತು ಪಾಕಿಸ್ತಾನ್ ನಡುವಣ 2ನೇ ಏಕದಿನ ಪಂದ್ಯ ಗುರುವಾರ ನಡೆಯಬೇಕಿದ್ದು, ಅದಕ್ಕೂ ಮುನ್ನ ಲಂಕಾ ಆಟಗಾರರು ಪಾಕಿಸ್ತಾನದಿಂದ ಹಿಂತಿರುಗಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಪಂದ್ಯಕ್ಕೆ ಶ್ರೀಲಂಕಾ ತಂಡದ 8 ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಇತ್ತ ಲಂಕಾ ತಂಡದ ಪ್ರಮುಖ ಆಟಗಾರರು ಅಲಭ್ಯರಾದರೆ ಇಂದಿನ ಪಂದ್ಯ ನಡೆಯುವುದು ಅನುಮಾನ.

ಹೀಗಾಗಿ ಪಾಕಿಸ್ತಾನ್ ಹಾಗೂ ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯವನ್ನು ಮರು ನಿಗದಿ ಮಾಡುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ.

ಶ್ರೀಲಂಕಾ ಆಟಗಾರರಿಗೆ ಜೀವಭಯ:

ಇಸ್ಲಾಮಾಬಾದ್‌ನ ನ್ಯಾಯಾಲಯದ ಹೊರಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದಾರೆ. ಈ ದಾಳಿಯು ಶ್ರೀಲಂಕಾ ಆಟಗಾರರಿಗೆ 2009ರ ಕಹಿ ಘಟನೆಯನ್ನು ನೆನಪಿಸಿದೆ.

2009 ರಲ್ಲಿ ಶ್ರೀಲಂಕಾ ತಂಡವು ಪಾಕ್ ಪ್ರವಾಸ ಕೈಗೊಂಡಿದ್ದಾಗ ಲಂಕಾ ತಂಡದ ಬಸ್ ಮೇಲೆ ಭಯೋತ್ಪಾದಕ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಶ್ರೀಲಂಕಾ ತಂಡದ ಆರು ಆಟಗಾರರು ಗಾಯಗೊಂಡಿದ್ದರು. ಈ ಅಹಿತಕರ ಘಟನೆಯಿಂದ ಸುಮಾರು ಒಂದು ದಶಕದ ಕಾಲ ಪಾಕಿಸ್ತಾನದಿಂದ ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ದೂರವಿಡಲಾಗಿತ್ತು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version