ಬೆಂಗಳೂರು (ಸಂಭ್ರಮಪ್ರಭಾ ಡೆಸ್ಕ್): ರಾಜ್ಯದ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಕಾಂಕ್ಷಿ ಯುವಜನತೆಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂಪೂರ್ಣ ‘ಉಚಿತ ಬಸ್ ಪಾಸ್’ ನೀಡುವ ಐತಿಹಾಸಿಕ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ.

ಎಲ್ಲಾ ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್ ಈ ಹಿಂದೆ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣ ಕಲ್ಪಿಸಲಾಗಿತ್ತು, ನಮಗೇನು ಸೌಲಭ್ಯವಿದೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಶಾಲಾ ಹಂತದಿಂದ ಹಿಡಿದು ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ (ಪಿಜಿ) ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ತೀರ್ಮಾನಿಸಿದೆ.

“ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಇದೇ ಮೊದಲ ಬಾರಿಗೆ ಇಂಥದ್ದೊಂದು ದೊಡ್ಡ ತೀರ್ಮಾನ ಕೈಗೊಂಡಿದೆ. ಈ ಪಾಸ್‌ಗಾಗಿ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಪಡೆಯುವುದಿಲ್ಲ. ಸಾರಿಗೆ ಇಲಾಖೆ ಜೊತೆ ಚರ್ಚಿಸಿ ಶೀಘ್ರದಲ್ಲೇ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಜೊತೆಗೆ ಈ ಯೋಜನೆಗೆ ಹೊಸ ಹೆಸರೊಂದನ್ನು ನೀಡಿ ಶೀಘ್ರದಲ್ಲೇ ಚಾಲನೆ ನೀಡಲಾಗುವುದು” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ಯಾಲೆಂಡರ್ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೂ ಸರ್ಕಾರ ಭರವಸೆ ಮೂಡಿಸಿದೆ. ಈಗಾಗಲೇ ಘೋಷಿಸಿರುವ 56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಇದ್ದ ತಾಂತ್ರಿಕ ಅಡೆತಡೆಗಳು ನಿವಾರಣೆಯಾಗಿವೆ. ಮುಂದಿನ ಸಚಿವ ಸಂಪುಟ ಸಭೆಯ ವೇಳೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಯಾವ ಇಲಾಖೆಯಲ್ಲಿ ಯಾವಾಗ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಹಾಗೂ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಸಂಪೂರ್ಣ ‘ಕ್ಯಾಲೆಂಡರ್’ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಸಿಂಹಪಾಲು: ‘ಖಾಸಗಿ ಉದ್ಯೋಗ ವಿನಿಮಯ ಕೇಂದ್ರ’ ಸ್ಥಾಪನೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ ಅಪಾರ ಮಾನವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನ್‌ಲೈನ್ ಮೂಲಕ ‘ಖಾಸಗಿ ಉದ್ಯೋಗ ವಿನಿಮಯ ಕೇಂದ್ರ’ (Private Employment Exchange) ಸ್ಥಾಪಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಐಟಿ-ಬಿಟಿ, ಆಸ್ಪತ್ರೆ, ಹೋಟೆಲ್ ಹಾಗೂ ಮಾಧ್ಯಮ ಸೇರಿದಂತೆ ಯಾವುದೇ ಖಾಸಗಿ ಸಂಸ್ಥೆಗಳು ತಮಗೆ ಎಷ್ಟು ಉದ್ಯೋಗಿಗಳು ಬೇಕು ಹಾಗೂ ಎಂತಹ ಕೌಶಲ್ಯವಿರುವವರು ಬೇಕು ಎಂಬುದನ್ನು ಈ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದು. ಕಂಪನಿಗಳ ಬೇಡಿಕೆಗೆ ತಕ್ಕಂತೆ ಸರ್ಕಾರವೇ ಯುವಕರಿಗೆ ಉಚಿತವಾಗಿ ತರಬೇತಿ ನೀಡಿ, ಉದ್ಯೋಗಕ್ಕೆ ಒದಗಿಸುವ ಕೆಲಸ ಮಾಡಲಿದೆ.

“ಖಾಸಗಿ ವಲಯದ ಈ ನೇಮಕಾತಿಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ (ಮೆಜಾರಿಟಿ) ಸಿಗಲೇಬೇಕು ಎನ್ನುವುದು ಸರ್ಕಾರದ ಸ್ಪಷ್ಟ ನಿಲುವು. ಆದರೆ, ಏಕಾಏಕಿ ನಿಯಮ ಹೇರಿ ಉದ್ಯಮಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ, ಎಫ್‌ಕೆಸಿಸಿಐ (FKCCI) ಸೇರಿದಂತೆ ವಿವಿಧ ಉದ್ಯಮಗಳ, ಮೆಡಿಕಲ್, ಕಾಲೇಜುಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಮೀಸಲಾತಿಯ ಶೇಕಡಾವಾರು ಪ್ರಮಾಣವನ್ನು ಅಂತಿಮಗೊಳಿಸಲಾಗುವುದು. ಈ ಸಂಪೂರ್ಣ ಪ್ರಕ್ರಿಯೆಯ ರೂಪುರೇಷೆ ಸಿದ್ಧಪಡಿಸಲು ಮೂವರು ಸಚಿವರನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಯಾವುದೇ ಪ್ರಭಾವಗಳಿಲ್ಲದೆ ಆನ್‌ಲೈನ್ ಮೂಲಕ ಪಾರದರ್ಶಕವಾಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಈ ಹೊಸ ಹೆಜ್ಜೆ ರಾಜ್ಯದ ಯುವಜನತೆಯಲ್ಲಿ ಹೊಸ ನಿರೀಕ್ಷೆ ಹುಟ್ಟುಹಾಕಿದೆ.
Share.
Leave A Reply

Exit mobile version