ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್ ಇಂದು ಬುಧವಾರ ಆದೇಶ ಹೊರಡಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೊಯ್ಮಲ್ಯ ಬಗ್ಚಿ ಮತ್ತು ವಿಪುಲ್ ಎಂ ಪಂಚೋಲಿ ಅವರಿದ್ದ ಪೀಠವು, ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಎ ಎಂ ಸಿಂಗ್ವಿ ಅವರ ವಾದ ಆಲಿಸಿದ ಬಳಿಕ, ಜೂನ್ 30ರ ಹಿಂದಿನ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿತು.

ಜನಗಣತಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR), ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಂತಹ ಕಾರ್ಯಗಳಲ್ಲಿ ರಾಜ್ಯದ ಸಿಬ್ಬಂದಿ ನಿರತರಾಗಿರುವ ಕಾರಣ, ಇನ್ನೂ ಮೂರು ತಿಂಗಳ ಹೆಚ್ಚುವರಿ ಸಮಯ ನೀಡುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಎರಡೂ ಮನವಿ ಸಲ್ಲಿಸಿದ್ದವು. ಈ ಹಿನ್ನೆಲೆಯಲ್ಲಿ, ಜೂನ್ 30ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ನೀಡಿದ್ದ ಸುಪ್ರೀಂ ಕೋರ್ಟ್‌ನ ಜನವರಿ 12ರ ಆದೇಶದಲ್ಲಿ ತಿದ್ದುಪಡಿ ಮಾಡುವಂತೆ ಕೋರಲಾಗಿತ್ತು.

ಸರ್ಕಾರ ಪರ ಹಿರಿಯ ವಕೀಲ ಎ ಎಂ ಸಿಂಗ್ವಿ ಅವರು, SIR ಪ್ರಕ್ರಿಯೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಿಬ್ಬಂದಿಯನ್ನು ನಿಯೋಜಿಸುವಲ್ಲಿ ತೊಂದರೆ ಎದುರಾಗುತ್ತಿದೆ ಎಂದು ವಾದಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿರಿಯ ವಕೀಲ ಕೆ ಪರಮೇಶ್ವರ, ಹಿಂದಿನ ಬಾರಿ ಅವಧಿ ವಿಸ್ತರಣೆ ನೀಡಿದಾಗ ಜೂನ್ 30, 2026ರೊಳಗೆ ಚುನಾವಣೆ ನಡೆಸುವುದಾಗಿ ಭರವಸೆ ನೀಡಲಾಗಿತ್ತು ಎಂದು ತಿಳಿಸಿದರು.

ಜನವರಿ 12ರಂದು ಸುಪ್ರೀಂ ಕೋರ್ಟ್, ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಜೂನ್ 30, 2026ರೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಹಳೆಯ ನಗರ ಪಾಲಿಕೆಯಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅವಧಿ 2020ರ ಸೆಪ್ಟೆಂಬರ್ 10ರಂದು ಕೊನೆಗೊಂಡಿತ್ತು. ಆದರೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಎರಡೂ ಪ್ರತ್ಯೇಕ ಅರ್ಜಿಗಳ ಮೂಲಕ ಸೆಪ್ಟೆಂಬರ್ 30, 2026ರವರೆಗೆ ಸಮಯ ವಿಸ್ತರಣೆ ಕೋರಿದ್ದವು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version