ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಮೈಸೂರು: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಂಶಪಾರಂಪರ್ಯ ರಾಜಕೀಯ ಆರೋಪ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ. ಯತೀಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಬೆಂಗಳೂರಿನ ಮತದಾರರ ಪಟ್ಟಿಗೆ ವರ್ಗಾಯಿಸಿರುವುದನ್ನು ಟೀಕಿಸಿದ್ದಾರೆ.

ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯಲ್ಲಿ ಯತೀಂದ್ರ ಅವರಿಗೆ ಪ್ರಮುಖ ಸ್ಥಾನ ನೀಡುವ ಉದ್ದೇಶದಿಂದ ಮಾಡಲಾಗಿರುವ “ವಂಶಪಾರಂಪರ್ಯ ರಾಜಕಾರಣ” ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರೇ ನೀವು ಮತ್ತು ನಿಮ್ಮ ಮಗ ಯತೀಂದ್ರ ಮಾತ್ರ ಅಧಿಕಾರದಲ್ಲಿ ಇರಬೇಕಾ? ದಯಮಾಡಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಮಹಾನಗರ ಪಾಲಿಕೆ ಚುನಾವಣೆ ಮಾಡಿ ಸ್ವಾಮಿ ಎಂದು ಆಗ್ರಹಿಸಿದರು.

ಐದು ವರ್ಷವೂ ನಮ್ಮ ತಂದೆಯೇ ಸಿಎಂ ಎಂದು ಯತೀಂದ್ರ ಹೇಳಿದ್ದಾರೆ. ಅದು ಅವರ ಪಕ್ಷದ ವಿಚಾರ. ನೀವು ಎಷ್ಟು ವರ್ಷವಾದರೂ ಅಧಿಕಾರದಲ್ಲಿರಿ. ನಿಮ್ಮ ಅಧಿಕಾರದ ಅವಧಿಯಲ್ಲೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಾಲಿಕೆ, ಗ್ರಾಮ ಪಂಚಾಯಿತಿ ಚುನಾವಣೆ ಮಾಡಿ ಎಂದು ಒತ್ತಾಯಿಸಿದರು,

ಸಮಾಜವಾದಿ ಎಂದು ಹೇಳಿಕೊಳ್ಳುವ ನೀವು, ನಿಮ್ಮ ಮಗನೇ ಅಧಿಕಾರದಲ್ಲಿದ್ದರೆ ಹೇಗೆ? ಪಕ್ಷಕ್ಕಾಗಿ ದುಡಿದಿರುವ ಇತರರಿಗೂ ಅಧಿಕಾರ ಕೊಡಿ. ಯಾವುದೇ ಪಕ್ಷದ ಕಾರ್ಯಕರ್ತನಾಗಿರಲಿ ಅವರು ಜಿಪಂ, ತಾಪಂ, ನಗರ ಪಾಲಿಕೆ ಸದಸ್ಯನಾಗಲು ಚುನಾವಣೆ ನಡೆಸಬೇಕು. ನಮಗೆ ಅಧಿಕಾರಿ ಸಿಗುವುದಿಲ್ಲ ಎಂಬ ಭಯದಿಂದ ಚುನಾವಣೆ ಮಾಡದೇ ಇದ್ದರೆ ಅದು ಪ್ರಜಾಪ್ರಭುತ್ವದ ಕಗ್ಗೊಲೆ. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ ಎಂಬ ಬದ್ಧತೆ ಇದ್ದರೆ ಕೂಡಲೇ ಚುನಾವಣೆ ಮಾಡಿ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲ ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಈಗ ಚುನಾವಣೆ ನಡೆಸಿದರೆ ಎನ್ ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುತ್ತದೆ ಎಂಬ ಭಯ ಸಿದ್ದರಾಮಯ್ಯರನ್ನು ಕಾಡುತ್ತಿದೆ. ಇದೇ ಕಾರಣದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮದು ಕುಟುಂಬ ರಾಜಕಾರಣವಲ್ಲ ಎಂಬ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆಶ್ರಯ ಸಮಿತಿ ಸದಸ್ಯ ಯಾರು? ಎಂಎಲ್ಸಿ ಯಾರು? ಬಿಡಿಎ ಸದಸ್ಯನಾಗಲು ಮೈಸೂರಿನ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಸಿ, ಬೆಂಗಳೂರಿನಲ್ಲಿ ಸೇರಿಸಿದ್ದು ಯಾಕೆ? ನಿಮ್ಮ ಯಾರೂ ನಿಷ್ಠಾವಂತ ಕಾರ್ಯಕರ್ತ ಇರಲಿಲ್ಲವೇ? ಇದರಲ್ಲಿ ಯಾರದು ಕುಟುಂಬ ರಾಜಕಾರಣ ಎಂದು ಪ್ರಶ್ನಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version