ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದರೂ ಅಹಿಂದ ನಾಯಕ ಸಿದ್ದರಾಮಯ್ಯ ಅವರ ತೂಕ ಹೈಕಮಾಂಡ್ ಮಟ್ಟದಲ್ಲಿ ಕಿಂಚಿತ್ತೂ ಕಡಿಮೆಯಾಗಿಲ್ಲ. ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ಹೆಜ್ಜೆ ಇಟ್ಟಿರುವ ಕಾಂಗ್ರೆಸ್ ಹೈಕಮಾಂಡ್, ಅವರ ಬೇಡಿಕೆಗಳಿಗೆ ಸಂಪೂರ್ಣ ಮಣೆ ಹಾಕಿದೆ. ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ ಹಾಗೂ ಸಚಿವ ಸಂಪುಟದಲ್ಲಿ ಸಿದ್ದು ಆಪ್ತರಿಗೆ ಸಿಂಹಪಾಲು ಸಿಕ್ಕಿರುವುದು ಇದಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ಬಿ.ಕೆ. ಹರಿಪ್ರಸಾದ್‌ಗೆ ಕೆಪಿಸಿಸಿ ಪಟ್ಟ ಹಾಗೂ ಎಂಎಲ್ಸಿ ಸ್ಥಾನ:

ಹೈಕಮಾಂಡ್ ಮುಂದೆ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದ್ದರು. ಸಿದ್ದರಾಮಯ್ಯ ಅವರ ಮಾತಿಗೆ ಒತ್ತು ನೀಡಿರುವ ಹೈಕಮಾಂಡ್, ನಿನ್ನೆ ಪದಗ್ರಹಣ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಅಲ್ಲದೇ ಮುಂಬರುವ ಜೂನ್ 18 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪ್ರಕಟಿಸಿರುವ 4 ಅಭ್ಯರ್ಥಿಗಳ ಪಟ್ಟಿಯಲ್ಲಿ ಹರಿಪ್ರಸಾದ್ ಅವರಿಗೆ ಮತ್ತೆ ಎಂಎಲ್ಸಿ ಟಿಕೆಟ್ ಕೂಡ ನೀಡಲಾಗಿದೆ. ಇದೇ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ ಮಳವಳ್ಳಿ ಶಿವಣ್ಣ ಕೂಡ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪರಮೇಶ್ವರ್‌ಗೆ ಡಿಸಿಎಂ, ಆಪ್ತರಿಗೆ ಮಂತ್ರಿಗಿರಿ:

ಡಿ.ಕೆ. ಶಿವಕುಮಾರ್ ಅವರ ನೂತನ ಸಂಪುಟದಲ್ಲಿ ತಮ್ಮ ಆಪ್ತರಿಗೆ ಸ್ಥಾನ ಕೊಡಿಸುವಲ್ಲಿ ಸಿದ್ದರಾಮಯ್ಯ ಸಂಪೂರ್ಣ ಯಶಸ್ವಿಯಾಗಿದ್ದಾರೆ. ಪಟ್ಟು ಹಿಡಿದು ಡಾ. ಜಿ. ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ಒದಗಿಸಿದ್ದಾರೆ.

ನಿನ್ನೆ ನಡೆದ ಕ್ಯಾಬಿನೆಟ್ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಬಳಗದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಶಾಸಕರಿಗೆ ಮನೆ ಹಾಕಲಾಗಿದೆ. ಪ್ರಮುಖವಾಗಿ ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕ್ಯಾಬಿನೆಟ್‌ಗೆ ಸೇರ್ಪಡೆಯಾಗಿದ್ದು, ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಒಟ್ಟಾರೆಯಾಗಿ, ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದರೂ ಪಕ್ಷದ ಸಂಘಟನೆ ಹಾಗೂ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಹಿಡಿತ ಮತ್ತು ಪ್ರಭಾವ ಮುಂದುವರಿದಿರುವುದು ಈ ನೇಮಕಗಳ ಮೂಲಕ ಸಾಬೀತಾಗಿದೆ.

 

Share.
Leave A Reply

Exit mobile version