ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಕೇಳಿದ ಕೂಡಲೇ ಚಲುವರಾಯ ನಾಯಕ ಎಂಬ ಅಭಿಮಾನಿಯೊಬ್ಬರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
“ಸಿದ್ದರಾಮಯ್ಯ ಸಾಹೇಬರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ನಮ್ಮ ಆಗ್ರಹ. ಅವರಿಗೆ ಐದು ವರ್ಷಗಳ ಪೂರ್ಣಾವಧಿ ನೀಡಬೇಕು. ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿಯವರು ಈ ವಿಚಾರದಲ್ಲಿ ತೆಗೆದುಕೊಂಡಿರುವ ನಿರ್ಧಾರ ನೂರಕ್ಕೆ ನೂರು ತಪ್ಪು,” ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ‘ಅನ್ನರಾಮಯ್ಯ’, ‘ದಲಿತ ರಾಮಯ್ಯ’, ‘ಅಹಿಂದ ನಾಯಕ’ ಹಾಗೂ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ ಅಭಿಮಾನಿಗಳು, “ಅವರ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲ. ಬಡವರ ಪಾಲಿನ ಧೀಮಂತ ನಾಯಕರಾಗಿರುವ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿಯೇ ರಾಜಕೀಯದಿಂದ ನಿರ್ಗಮಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ವರುಣಾ ಕ್ಷೇತ್ರದ ಅಭಿಮಾನಿಗಳಾದ ಅಭಿಷೇಕ್ ಮತ್ತು ಮಹದೇವ್ ಅವರು ಮಾತನಾಡಿ, “ರಾಹುಲ್ ಗಾಂಧಿಯವರಿಗೆ ಕೈ ಮುಗಿದು ಕೇಳಿಕೊಳ್ಳುತ್ತೇವೆ, ಇದು ಸಂಪೂರ್ಣ ತಪ್ಪು ನಿರ್ಧಾರ. ಇದೇ ರೀತಿ ಬೇರೆಯವರಿಗೆ ಸರ್ಕಾರವನ್ನು ಬಿಟ್ಟುಕೊಟ್ಟರೆ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಮತ್ತು ಈಗಿರುವ ಸರ್ಕಾರ ಆರು ತಿಂಗಳೂ ಉಳಿಯುವುದಿಲ್ಲ,” ಎಂದು ಎಚ್ಚರಿಕೆ ನೀಡಿದ್ದಾರೆ.
