Updated By: Priyalachhi

ದುಬೈ: ದುಬೈ ಏರೋ ಶೋ ವೇಳೆ ಶುಕ್ರವಾರ ಮಧ್ಯಾಹ್ನ ಭಾರತದ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸುತ್ತಿದ್ದ ವಿಮಾನ ನೋಡ ನೋಡುತ್ತಿದ್ದಂತೆಯೇ ಬೆಂಕಿಯುಂಡೆಯಾಗಿ ನೆಲಕ್ಕೆ ಅಪ್ಪಳಿಸಿದೆ.

ಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ.

ಪೈಲಟ್‌ನ ಸ್ಥಿತಿ ಅಥವಾ ಸ್ಫೋಟ ಸಂಭವಿಸಿದೆಯೇ ಎಂಬುದರ ಕುರಿತು ಅಧಿಕಾರಿಗಳು ತಕ್ಷಣಕ್ಕೆ ದೃಢಿಕರಿಸಿಲ್ಲ. ಭಾರತೀಯ ವಾಯುಪಡೆಯಿಂದ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನಗಳಲ್ಲಿ ಒಂದಾದ ದ್ವೈವಾರ್ಷಿಕ ದುಬೈ ಏರ್ ಶೋ ವೇಳೆ ಈ ಅಪಘಾತ ಸಂಭವಿಸಿದೆ. ಎಮಿರೇಟ್ಸ್ ಮತ್ತು ಪ್ಲೈ ದುಬೈನಿಂದ ಬಹು ಬಿಲಿಯನ್ ಡಾಲರ್ ಮೊತ್ತದ ವಿಮಾನ ಖರೀದಿ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಏರ್ ಶೋ ವೇಳೆಯಲ್ಲಿ ಘೋಷಿಸಲಾಗಿದೆ. ಇದು ಎರಡನೇ ತೇಜಸ್ ವಿಮಾನದ ಅಪಘಾತವಾಗಿದೆ. ಮಾರ್ಚ್ 2024ರಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತೇಜಸ್ ಯುದ್ಧವಿಮಾನವು ಪತನಗೊಂಡಿತ್ತು.ಆದರೆ ಪೈಲಟ್ ಸುರಕ್ಷಿತವಾಗಿ ಜಿಗಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದರು.ತೇಜಸ್ 4.5 ಪೀಳಿಗೆಯ ಬಹುಪಯೋಗಿ ಯುದ್ಧ ವಿಮಾನವಾಗಿದ್ದು, ವಾಯು-ರಕ್ಷಣಾ ಕಾರ್ಯಾಚರಣೆ, ಆಕ್ರಮಣಕಾರಿ ವಾಯು ಬೆಂಬಲ ಮತ್ತು ಯುದ್ಧ ಕಾರ್ಯಾಚರಣೆಗಳನ್ನು ನಿರ್ವಹಿಸಲು ನಿರ್ಮಿಸಲಾಗಿದೆ. ಇದು ಹಗುರವಾದ ಮತ್ತು ಚಿಕ್ಕ ಯುದ್ಧವಿಮಾನಗಳಲ್ಲಿ ಒಂದಾಗಿದೆ.

ಪೈಲಟ್ ಸಾವು ದೃಢ

ಅಪಘಾತದಲ್ಲಿ ಪೈಲಟ್ ಸಾವನ್ನಪ್ಪಿರುವುದನ್ನು ಭಾರತೀಯ ವಾಯುಪಡೆ ದೃಢಪಡಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಸಾವನ್ನಪ್ಪಿದ್ದಾರೆ. ಈ ದು:ಖದ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುವುದಾಗಿ ತಿಳಿಸಿದೆ.

ಅಪಘಾತಕ್ಕೆ ಏನು ಕಾರಣ ಎಂಬುದನ್ನು ತಿಳಿಯಲು ವಿಚಾರಣಾ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಭಾರತೀಯ ವಾಯುಪಡೆ ಹೇಳಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version