ಬೆಂಗಳೂರು | ಇಂದು ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ, ಒಕ್ಕಲಿಗ ಸಮುದಾಯದ ಹಕ್ಕುಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾದ ವಿಷಯಗಳು:
– ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ನ್ಯಾಯಸಮ್ಮತ ಮೀಸಲಾತಿ ನೀಡಬೇಕು.
– ಕಾಮಗಾರಿ ಗುತ್ತಿಗೆಗಳಲ್ಲಿ ಹಿಂದುಳಿದ ಒಕ್ಕಲಿಗ ಪ್ರವರ್ಗಕ್ಕೂ ಮೀಸಲಾತಿ ಕಲ್ಪಿಸಬೇಕು.
– ಬಿಡಿಎ, ಕೆಐಎಡಿಬಿ ಸೇರಿದಂತೆ ವಿವಿಧ ನಿವೇಶನ ಹಂಚಿಕೆ ಯೋಜನೆಗಳಲ್ಲಿ ಒಕ್ಕಲಿಗ ಸಮುದಾಯಕ್ಕೂ ಸಮಾನ ಅವಕಾಶ ದೊರಕಬೇಕು.
– ಒಕ್ಕಲಿಗ ಸಂಘದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಬೈಲಾ ತಿದ್ದುಪಡಿ ಕುರಿತು ಸದಸ್ಯರ ಅಭಿಪ್ರಾಯಗಳನ್ನು ಆಲಿಸಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕುಣಿಗಲ್ ಕ್ಷೇತ್ರದ ಶಾಸಕರಾದ ಹೆಚ್.ಡಿ. ರಂಗನಾಥ್ ರವರು, ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕರಾದ ಆಡಿಟರ್ ನಾಗರಾಜ್ ಯಲಚವಾಡಿ ರವರು, ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಟಿ. ಕೋನಪ್ಪ ರೆಡ್ಡಿ ರವರು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ರವರು, ಸಾಹಿತ್ಯ ಅಕಾಡೆಮಿ ಸದಸ್ಯರಾದ ಎಲ್.ಎನ್. ಮುಕುಂದರಾಜು ರವರು, ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷರಾದ ಹೆಚ್ .ಟಿ ಕೃಷ್ಣೇಗೌಡ ರವರು, ಮುಖಂಡರಾದ ರಾಮಚಂದ್ರಯ್ಯ ರವರು (ನಿವೃತ್ತ ಮುಖ್ಯ ಇಂಜಿನಿಯರ್), ಮಾಜಿ ಬಿಬಿಎಂಪಿ ಸದಸ್ಯರಾದ ಮೋಹನ್ ರವರು, ಸಮಾಜ ಸೇವಕರಾದ ಶಿವರಾಮಯ್ಯ ರವರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಒಕ್ಕಲಿಗ ಸಮುದಾಯದ ಹಿತಾಸಕ್ತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ತಮ್ಮ ಅಮೂಲ್ಯ ಅಭಿಪ್ರಾಯಗಳನ್ನು ಹಂಚಿಕೊಂಡು, ಸಮಾಜದ ನ್ಯಾಯಯುತ ಹಕ್ಕುಗಳಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
